ಶಿವನು ತಾನೆ ಗುರುವಾಗಿ ಬಂದು

Category: ವಚನಗಳು

Author: ಅಕ್ಕಮಹಾದೇವಿ

ಶಿವನು ತಾನೆ ಗುರುವಾಗಿ ಬಂದು
ಮಹಾಘನಲಿಂಗವ ವೇದಿಸಿಕೊಟ್ಟ ಪರಿಯೆಂತೆಂದೊಡೆ
ಆತ್ಮಗೂಡಿ ಪಂಚಭೂತಂಗಳನೆ ಷಡಂಗವೆಂದೆನಿಸಿ,
ಆ ಅಂಗಕ್ಕೆ ಕಲೆಗಳನೆ ಷಡುಶಕ್ತಿಗಳೆನಿಸಿ,
ಆ ಶಕ್ತಿಗಳಿಗೆ ಷಡ್ವಿಧ ಭಕ್ತಿಯನಳವಡಿಸಿ,
ಆ ಭಕ್ತಿಗಳಿಗೆ ಭಾವನಮನಬುದ್ಧಿಚಿತ್ತ
ಅಹಂಕಾರಗಳನೆ ಹಸ್ತಂಗಳೆಂದೆನಿಸಿ,
ಆ ಹಸ್ತಂಗಳಿಗೆ ಮಹಾಲಿಂಗವಾದಿಯಾದ
ಪಂಚಲಿಂಗಂಗಳನೆ ಷಡ್ವಿಧ ಲಿಂಗಂಗಳೆಂದೆನಿಸಿ,
ಆ ಮಂತ್ರಲಿಂಗಂಗಳಿಗೆ ಹೃದಯಗೂಡಿ
ಪಂಚೇಂದ್ರಿಯಂಗಳನೆ ಮುಖಂಗಳೆಂದೆನಿಸಿ,
ಆ ಮುಖಂಗಳಿಗೆ ತನ್ಮಾತ್ರಂಗಳನೆ ದ್ರವ್ಯ ಪದಾರ್ಥಗಳೆಂದೆನಿಸಿ,
ಆ ದ್ರವ್ಯಪದಾರ್ಥಂಗಳು ಆಯಾ ಮುಖದ ಲಿಂಗಗಳಲ್ಲಿ
ನಿರಂತರ ಸಾವಧಾನದಿಂದ ಅರ್ಪಿತವಾಗಿ
ಬೀಗಲೊಡನೆ ಅಂಗಸ್ಥಲಂಗಳಡಗಿ,
ತ್ರಿವಿಧ ಲಿಂಗಾಂಗ ಸ್ಥಲಂಗಳುಳಿದು,
ಕಾಯಗುರು, ಪ್ರಾಣಲಿಂಗ, ನ ಜಂಗಮ,
ಗುರುವಿನಲ್ಲಿ ಶುದ್ಧ ಪ್ರಸಾದ
ಲಿಂಗದಲ್ಲಿ ಸಿದ್ಧಪ್ರಸಾದ
ಜಂಗಮದಲ್ಲಿ ಪ್ರಸಿದ್ಧ ಪ್ರಸಾದ
ಇಂತೀ ತ್ರಿವಿಧ ಪ್ರಸಾದ ಏಕಾರ್ಥವಾಗಿ
ಮಹಾಘನ ಪರಿಪೂರ್ಣ ಪ್ರಸಾದವಳವಟ್ಟ ಶರಣ
ನಿಯಲ್ಲ, ಅನಿ ಮುನ್ನವೆ ಅಲ್ಲ,
ಶೂನ್ಯನಲ್ಲ, ನಿಶ್ಶೂನ್ಯನಲ್ಲ, ದ್ವೈತಿಯಲ್ಲ, ಅದ್ವೈತಿಯಲ್ಲ.
ಇಂತೀ ಉಭಯಾತ್ಮಕ ತಾನೆಯಾಗಿ
ಇದು ಕಾರಣ, ಇದರಾಗುಹೋಗು ಸಕಲಸಂಬಂಧವ
ಚೆನ್ನಮಲ್ಲಿಕಾರ್ಜುನದೇವಾ, ನಿಮ್ಮ ಶರಣರೆ ಬಲ್ಲರು.