ಆವ ಸಿರಿಯಲಿ ನೀನು ಎನ್ನ ಮರೆತೆ
Category: ಶ್ರೀರಾಮ
Author: ಕನಕದಾಸ
ಆವ ಸಿರಿಯಲಿ ನೀನು ಎನ್ನ ಮರೆತೆ
ದೇವ ಜಾನಕೀರಮಣ ಪೇಳು ರಘುಪತಿಯೆ ||ಪ||
ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆ
ಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆ
ಶರಧಿಗೆ ಸೇತುವೆಗಟ್ಟಿದೆನೆನ್ನುವಾ ಸಿರಿಯೆ
ಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ ||1||
ಕಡಲೊಳಗೆ ಮನೆಮಾಡಿ ಮಲಗಿದೆನೆಂಬಾ ಸಿರಿಯೆ
ಮೃಢ ನಿನ್ನ ಸಖನಾದನೆಂಬ ಸಿರಿಯೆ
ಬಿಡದೆ ದ್ರೌಪದಿ ಮಾನ ಕಾಯ್ದೆನೆಂಬಾ ಸಿರಿಯೆ
ದೃಢವಾಗಿ ಹೇಳೆನಗೆ ದೇವಕೀ ಸುತನೆ ||2||
ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆ
ಕಾಮ ನಿನ್ನ ಸುತನಾದನೆಂಬ ಸಿರಿಯೆ
ಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆ
ಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ ||3||
ಮನುಜರೆಲ್ಲರು ನಿನ್ನ ಸ್ತುತಿಸುವರೆಂಬ ಸಿರಿಯೆ
ಹನುಮ ನಿನ್ನ ಬಂಟನಾದನೆಂಬ ಸಿರಿಯೆ
ಬಿನುಗು ದೈವಗಳು ನಿನಗೆಣೆಯಿಲ್ಲವೆಂಬ ಸಿರಿಯೆ
ಅನುಮಾನ ಮಾಡದೆ ಪೇಳೊ ನರಹರಿಯೆ ||4||
ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿ
ಪಂಥವೇ ನಿನಗಿದು ಆವ ನಡತೆ
ಕಂತುಪಿತ ಕಾಗಿನೆಲೆಯಾದಿಕೇಶವ ರಂಗ
ಚಿಂತೆಯನು ಬಿಡಿಸಿ ಸಂತೋಷವನು ಪಡಿಸೊ ||5||