ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ
Category: ಶ್ರೀಕೃಷ್ಣ
Author: ಕನಕದಾಸ
ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ||ಪ||
ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನು ||ಅ||
ತರಳ ಪ್ರಹ್ಲಾದ ಹರಿ ವಿಶ್ವಮಯನೆಂದು
ಬರೆದೋದಲವನ ಪಿತ ಕೋಪದಿಂದ
ಸ್ಥಿರವಾದಡೀ ಕಂಬದಲಿ ತೋರು ತೋರೆನಲು
ಭರದಿಂದ ಬರಲದಕೆ ವೈಕುಂಠ ನೆರೆಮನೆಯೆ ||1||
ಪಾಪ ಕರ್ಮವ ಮಾಡಿದಜಮಿಳನ ಯಮಭಟರು
ಕೋಪದಿಂದೆಳೆಯುತಿರೆ ಭೀತಿಯಿಂದ
ತಾ ಪುತ್ರನನು ಕರೆಯೆ ಕೇಳಿ ರಕ್ಷಿಸೆ ಶ್ವೇತ
ದ್ವೀಪವೀ ಧರೆಗೆ ಸನಿಹದಲ್ಲಿಹುದೆ ||2||
ಕರಿರಾಜನನು ನೆಗಳು ನುಂಗುತಿರೆ ಭಯದಿಂದ
ಮೊರೆಯಿಡಲು ಕೇಳಿ ತ್ವರಿತದಲಿ ಬಂದು
ಕರುಣದಲಿ ಬಂಧನವ ಪರಿಹರಿಸೆ ಗಜರಾಜ
ನಿರುವ ಸರಸಿಯು ಅನಂತಾಸನಕೆ ಮುಮ್ಮನೆಯೆ ||3||
ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆ
ತರುಣಿ ಹಾ ಕೃಷ್ಣ ಎಂದೊದರೆ ಕೇಳ್ದು
ಭರದಿಂದ ಅಕ್ಷಯಾಂಬರವೀಯೆ ಹಸ್ತಿನಾ
ಪುರಿಗೆ ದ್ವಾರಾವತಿಯು ಕೂಗಳತೆಯೆ ||4||
ಅಣು ಮಹತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯ
ಗಣನೆಯಿಲ್ಲದ ಮಹಾಮಹಿಮನೆನಿಪ
ಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನು
ನೆನೆದವರ ಮನದೊಳಿಹನೆಂಬ ಬಿರುದುಂಟಾಗಿ ||5||