ಡಿಂಬದಲ್ಲಿ ಇರುವ ಜೀವ ಕಂಬಸೂತ್ರ

Category: ವೈರಾಗ್ಯ

Author: ಕನಕದಾಸ

ಡಿಂಬದಲ್ಲಿ ಇರುವ ಜೀವ ಕಂಬಸೂತ್ರ ಗೊಂಬೆಯಂತೆ
ಎಂದಿಗಿದ್ದರೊಂದು ದಿನ ಸಾವು ತಪ್ಪದು ||ಪ||

ಹುಟ್ಟುತೇನು ತಾರಲಿಲ್ಲ ಸಾಯುತೇನು ಒಯ್ಯಲಿಲ್ಲ
ಸುಟ್ಟು ಸುಟ್ಟು ಸುಣ್ಣದ ಹರಳಾಯಿತೀ ದೇಹ
ಹೊಟ್ಟೆ ಭಾಳ ಕೆಟ್ಟದೆಂದು ಎಷ್ಟು ಕಷ್ಟ ಪಟ್ಟರೂನು
ಬಿಟ್ಟು ಹೋಗುವಾಗ ಗೇಣು ಬಟ್ಟೆ ಕಾಣದು ||1||

ಹತ್ತು ಎಂಟು ಲಕ್ಷ ಎಣಿಸಿ ಮತ್ತೆ ಸಾಲದೆಂದು ಪರರ
ಅರ್ಥಕ್ಕಾಗಿ ಆಸೆಪಟ್ಟು ಸುಳ್ಳು ನ್ಯಾಯ ಮಾಡ್ವರು
ಬಿತ್ತಿ ಬೆಳೆದು ತನ್ನದೆಂಬ ವ್ಯರ್ಥಚಿಂತೆಯನ್ನು ಮಾಡೆ
ಸತ್ತು ಹೋದ ಮೇಲೆ ಅರ್ಥ ಯಾರಿಗಾಹುದೊ ||2||

ಹೊನ್ನು ಹೆಣ್ಣು ಮಣ್ಣು ಮೂರು ತನ್ನಲಿದ್ದು ಉಣ್ಣಲಿಲ್ಲ
ಅಣ್ಣ ತಮ್ಮ ತಾಯಿ ತಂದೆ ಬಯಸಲಾಗದು
ಅನ್ನ ವಸ್ತ್ರ ಭೋಗಕ್ಕಾಗಿ ತನ್ನ ಸುಖವ ಕಾಣಲಿಲ್ಲ
ಮಣ್ಣುಪಾಲು ಆದಮೇಲೆ ಯಾರಿಗಾಹುದೊ ||3||

ಬೆಳ್ಳಿ ಬಂಗರಿಟ್ಟುಕೊಂಡು ಒಳ್ಳೆ ವಸ್ತ್ರ ಹೊದ್ದುಕೊಂಡು
ಅಳ್ಳಾಚಾರಿ ಗೊಂಬೆಯಂತೆ ಆಡಿಹೋಯಿತು
ಹಳ್ಳ ಹರಿದು ಹೋಗುವಾಗ ಗುಳ್ಳೆ ಬಂದು ಒಡೆಯುವಂತೆ
ಉಳ್ಳೆ ಪೊರೆಯಂತೆ ಕಾಣೊ ಸಂಸಾರದಾಟವು ||4||

ವಾರ್ತೆ ಕೀರ್ತಿಯೆಂಬುವೆರಡು ಸತ್ತ ಮೇಲೆ ಬಂದವಯ್ಯ
ವಸ್ತು ಪ್ರಾಣನಾಯಕನು ಎಲ್ಲಿ ದೊರಕ್ಯಾನು
ಕರ್ತೃ ಕಾಗಿನೆಲೆಯಾದಿಕೇಶವನ ಚರಣಕಮಲ
ನಿತ್ಯದಲ್ಲಿ ಭಜಿಸಿ ಸುಖಿಯಾಗಿ ಬಾಳೆಲೊ ||5||