ತಲ್ಲಣಿಸದಿರು ಕಂಡ್ಯ ತಾಳು ಮನವೆ (ಸಂಪೂರ್ಣ)

Category: ಶ್ರೀಕೃಷ್ಣ

Author: ಕನಕದಾಸ

ತಲ್ಲಣಿಸದಿರು ಕಂಡ್ಯ ತಾಳು ಮನವೆ ||ಪ||
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ||ಅ||

ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆ
ಕಟ್ಟೆಯನು ಕಟ್ಟಿ ನೀರೆರೆದವರು ಯಾರೊ
ಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು
ಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ ||1||

ಅಡವಿಯೊಳಗಾಡುವ ಮೃಗ ಪಕ್ಷಿಗಳಿಗೆಲ್ಲ
ಅಡಿಗಡಿಗೆ ಆಹಾರವಿತ್ತವರು ಯಾರೊ
ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿ
ಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ ||2||

ನವಿಲಿಗೆ ಚಿತ್ರ ಬರೆದವರು ಯಾರು
ಪವಳದ ಲತೆಗೆ ಕೆಂಪಿಟ್ಟವರು ಯಾರು
ಸವಿಮಾತಿನರಗಿಳಿಗೆ ಹಸುರು ಬರೆದವರು ಯಾರು
ಅವನೆ ಸಲಹುವನು ಇದಕೆ ಸಂಶಯವಿಲ್ಲ ||3||

ಕಲ್ಲಿನಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲ
ಅಲ್ಲಲ್ಲಿಗಾಹಾರ ತಂದೀವರಾರು
ಬಲ್ಲಿದನು ಕಾಗಿನೆಲೆಯಾದಿಕೇಶವರಾಯ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ||4||