ತೊರೆದು ಜೀವಿಸುಬಹುದೆ ಹರಿ
Category: ಶ್ರೀಕೃಷ್ಣ
Author: ಕನಕದಾಸ
ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ ||
ತಾಯಿ ತಂದೆಯ ಬಿಟ್ಟು ತಪವ ಮಾಡಲು ಬಹುದು
ದಾಯಾದಿ ಬಂಧುಗಳ ಬಿಡಲು ಬಹುದು
ರಾಯ ಮುನಿದರೆ ರಾಜ್ಯವನೆ ಬಿಡಬಹುದು
ಕಾಯಜಪಿತ ನಿನ್ನಡಿಯ ಬಿಡಲಾಗದು ||೧||
ಒಡಲು ಹಸಿದರೆ ಅನ್ನವನೆ ಬಿಡಬಹುದು
ಪಡೆದ ಕ್ಷೇತ್ರವ ಬಿಟ್ಟು ಹೊರಡ ಬಹುದು
ಮಡದಿ ಮಕ್ಕಳ ಕಡೆಗೆ ತೊಲಗಿಸಿಬಿಡಬಹುದು
ಕಡಲೊಡೆಯ ನಿಮ್ಮಡಿಯ ಘಳಿಗೆ ಬಿಡಲಾಗದು ||೨||
ಪ್ರಾಣವ ಪರರಿಗೆ ಬೇಡಿದರೆ ಕೊಡಬಹುದು
ಮಾನಾಭಿಮಾನವ ತಗ್ಗಿಸಬಹುದು
ಪ್ರಾಣದಾಯಕನಾದ ಆದಿಕೇಶವರಾಯ
ಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು ||೩||