ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ

Category: ಶ್ರೀಕೃಷ್ಣ

Author: ಕನಕದಾಸ

ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ- ಜಗ ||ಪ||
ದೇಕ ವಿಖ್ಯಾತ ಪಶ್ಚಿಮ ರಂಗಧಾಮ ||ಅ||

ತಮನೊಡನೆ ಹೋರಿ ಬೆಟ್ಟವನು ಬೆನ್ನಲಿ ಪೊತ್ತು
ರಮಣಿ ಭೂಮಿಯನು ತಂದಾಯಾಸವೂ
ಅಮರವೈರಿಯ ಕರುಳ ಕಿತ್ತ ಕಡು ಧಾವತಿಯೊ
ಕ್ಷಮೆಯನಳೆದೀ ಪಾದಕಮಲ ನೊಂದವೊ ||1||

ಪೊಡವಿಪಾಲಕರ ವಂಶವನು ವಪನ ಮಾಡಿ
ಕೊಡಲಿಯನು ಬಿಸುಟು ಮಲಗಿದ ಭಾವವೊ
ಮಡದಿಯನು ಕದ್ದೊಯ್ದವನ ಶಿರವನೆ ತರಿದು
ಒಡಲಿನಾಯಾಸದಲಿ ಪವಡಿಸಿದ ಪರಿಯೋ ||2||

ಖೂಳ ಶಿಶುಪಾಲಾದಿ ಎದುರಾಂತ ವೀರರ ಕೊಂದು
ಕಾಳಿಂಗದ ಹೆಡೆಯ ತುಳಿತುಳಿದು ಮೈಯಲಸಿತೊ
ಲೀಲೆಗೋಸುಗ ಬಂದು ನಿರ್ವಾಣದಲಿ ನಿಂದು
ಆ ಲಜ್ಜೆಗಾಗಿ ತಲೆ ಬಾಗಿ ಮಲಗಿದೆಯೊ ||3||

ನಾಲ್ಕು ಯುಗದಾಧಾರಿ ಕಡೆಗೆ ತುರಗವನೇರಿ
ಸಾಕಾಗಿ ದಣಿದು ನೀನಿಲ್ಲಿ ಮಲಗಿದೆಯೊ
ಸಾಕಾರಿಯಾಗಿ ಗೌತಮ ಮುನೀಶ್ವರನಿಗೆ
ಬೇಕೆಂದು ನೀ ಕೊಟ್ಟ ವರಕೆ ಮಲಗಿದೆಯೊ ||4||

ಇನ್ನೆಷ್ಟು ಕಾಲ ನೀನಿಲ್ಲಿ ಮಲಗಿದ್ದರೂ
ನಿನ್ನನೆಬ್ಬಿಸುವವರನೊಬ್ಬರನು ಕಾಣೆ
ಉನ್ನಂತ ಕಾಗಿನೆಲೆಯಾದಿಕೇಶವರಾಯ
ಚೆನ್ನ ಶ್ರೀರಂಗಪಟ್ಟಣದ ರಂಗಧಾಮ ||5||